ಅಧ್ಯಾಯ 14


ಜಲೋದರ ರೋಗಿಗೆ ಆರೋಗ್ಯದಾನ

1ಅಂದು ಸಬ್ಬತ್‌ದಿನ. ಯೇಸುವು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. 2ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು. 3 ‘’ಸಬ್ಬತ್‌ದಿನ ಗುಣಪಡಿಸುವುದು ಸರಿಯೋ ತಪ್ಪೋ? ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು. 4 ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈಹಿಡಿದು ಗುಣಪಡಿಸಿ ಕಳಿಸಿಬಿಟ್ಟರು. 5 ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್‌ದಿನವಾಗಿದ್ದರೂ ನೀವು ತಡಮಾಡದೆ ಮೇಲಕ್ಕೆತ್ತುವುದಿಲ್ಲವೆ? ಎಂದು ಕೇಳಿದರು. 6 ಅದಕ್ಕೂ ಅವರು ನಿರುತ್ತರರಾದರು.

ದೀನ ಸ್ಥಾನಮಾನ

7ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು: 8 “ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು. 9ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರ ಬಂದು, ‘ಇವನಿಗೆ ನಿನ್ನ ಸ್ಥಳ ಬಿಟ್ಟುಕೊಡು, ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು. 10ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಳದಲ್ಲಿ ಹೋಗಿ ಕುಳಿತುಕೋ, ಕರೆದವನು ಬಂದು, ‘ಗೆಳೆಯಾ, ಮೇಲೆ ಬಾ’ ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳ ಮುಂದೆ ನಿನಗೆ ಗೌರವ ಸಿಗುವುದು. 11ಅಂತೆಯೇ, ತನ್ನನ್ನು ತಾನೆ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು: ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು, ಎಂದರು.

ಧನ್ಯವಾದ ದಾನ

12ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುವು, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಬಂಧುಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿ ತೀರಿಸಿಬಿಡಬಹುದು. 13ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು, ಇಂಥವರನ್ನು ಕರೆ; 14ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು, ಎಂದರು.

ಅಪೂರ್ವ ಆಹ್ವಾನಿತರು
(ಮತ್ತಾಯ ೨೨:೧-೧೦)

15ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸು ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದಲ್ಲಿ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು! ಎಂದನು. 16ಯೇಸು ಅವನಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನು ಏರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ. 17ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ, ಎಂದು ಹೇಳಿ ಆಹ್ವಾನಿತರನ್ನು ಕರೆದು ತರಲು ಸೇವಕರನ್ನು ಕಳುಹಿಸಿದ. 18ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು, ‘ಕ್ಷಮಿಸಬೇಕು, ಎಂದು ಹೇಳಲಾರಂಭಿಸಿದರು. 19ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ. ಅಲ್ಲಿಗೆ ಹೋಗಿ ನೋಡಬೇಕಾಗಿದೆ, ಎಂದ. 20ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು, ಎಂದ. ಮತ್ತೊಬ್ಬ ನನಗೆ ಈಗ ತಾನೆ ಮದುವೆಯಾಗಿದೆ, ಬರುವುದಕ್ಕಾಗುವುದಿಲ್ಲ, ಎಂದನು.
21 ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ. 22ಇದನ್ನು ಕೇಳಿ ಯಜಮಾನನಿಗೆ ರೋಷ ಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂತವರನ್ನು ಕರೆದುಕೊಂಡು ಬಾ, ಎಂದು ಆಜ್ಞೆ ಮಾಡಿದ. 23ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ, ಎಂದು ಹೇಳಿದ. ಅದಕ್ಕೆ ಯಜಮಾನ, ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ. 24ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ಸಹ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು! ಎಂದು ಸ್ಪಷ್ಟಪಡಿಸಿದ.

ಶಿಷ್ಯನಿಗೆ ಸವಾಲು
(ಮತ್ತಾಯ ೧೦:೩೭-೩೮)

25ಜನರು ಗುಂಪುಗುಂಪಾಗಿ ಯೇಸುವನ್ನು ಹಿಂಬಾಲಿಸಿ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: 26 “ನನ್ನಲ್ಲಿಗೆ ಬರುವ ಯಾರೊಬ್ಬನೂ ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. 27ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನು ನನ್ನ ಶಿಷ್ಯನಾಗಲಾರನು. 28ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಚಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? 29ಇಲ್ಲದೆ ಹೋದರೆ, ಅವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, 30 ‘ಕಟ್ಟಲಾರಂಭಿಸಿದ, ಮುಗಿಸಲು ಇವನಿಂದಾಗಲಿಲ್ಲ! ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯ ಮಾಡುವರು. 31ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ  ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? 32ಸಾದ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಶರತ್ತುಗಳೇನು ಎಂದು ವಿಚಾರಿಸುತ್ತಾನೆ. 33ಅದೇ ಮೇರೆಗೆ, ನಿಮ್ಮಲ್ಲಿ ಯಾರು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ”.

ಸಪ್ಪೆಯಾದ ಉಪ್ಪು
(ಮತ್ತಾಯ ೫:೧೩; ಮಾರ್ಕ ೯:೫೦)

34 “ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪಗಾದರೆ ಅದಕ್ಕೆ ಇನ್ನಾವುದರಿಂದ ರುಚಿ ಬಂದೀತು? ಇನ್ನು ಅದು ಭೂಮಿಗೇ ಆಗಲಿ, ತಿಪ್ಪೆ ಗುಂಡಿಗೇ ಆಗಲಿ ಉಪಯೋಗವಾಗದು. ಜನರು ಅದನ್ನು ಹೊರಗೆ ಬಿಸಾಡುತ್ತಾರಷ್ಟೆ. ಕೇಳಿವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ!” ಎಂದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ